ಬಂಡಾಯದ ಕಿಚ್ಚಿಗೆ ಸಿಎಂ ಬ್ರೇಕ್: ‘ಕಾವೇರಿ’ಯಲ್ಲಿ ಜಮೀರ್ಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್?ದಾವಣಗೆರೆ ಪಾಲಿಟಿಕ್ಸ್ನಲ್ಲಿ ಸಂಚಲನ.



ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಪಕ್ಷದೊಳಗಿನ ಆಂತರಿಕ ಅಸಮಾಧಾನ ಮತ್ತು ಬಂಡಾಯದ ಚಟುವಟಿಕೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಂಗಳವಾರ ರಾತ್ರಿ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
‘ಕಾವೇರಿ’ ನಿವಾಸದಲ್ಲಿ ನಡೆದಿದ್ದೇನು?
ಮಂಗಳವಾರ ತಡರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಭೇಟಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅನಿರೀಕ್ಷಿತ ಶಾಕ್ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಪರ ಪ್ರಚಾರ ನಡೆಸುವಲ್ಲಿ ಜಮೀರ್ ಅಹ್ಮದ್ ಮತ್ತು ಅವರ ಆಪ್ತರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಿಎಂ ಕೆಂಡಾಮಂಡಲವಾಗಿದ್ದಾರೆ ಎನ್ನಲಾಗಿದೆ.
ಜಮೀರ್ಗೆ ಸಿಎಂ ನೀಡಿದ ಎಚ್ಚರಿಕೆ ಏನು?
ಮೂಲಗಳ ಪ್ರಕಾರ, “ಪಕ್ಷದ ಶಿಸ್ತು ಉಲ್ಲಂಘಿಸಿದರೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಅಲ್ಪಸಂಖ್ಯಾತ ನಾಯಕತ್ವದ ಹೆಸರಿನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಜಮೀರ್ ಅವರಿಗೆ ನೇರವಾಗಿಯೇ ಎಚ್ಚರಿಸಿದ್ದಾರೆ. ವಿಶೇಷವಾಗಿ ದಾವಣಗೆರೆಯಲ್ಲಿ ಜಬ್ಬಾರ್ ಅವರಿಗೆ ಟಿಕೆಟ್ ತಪ್ಪಿದ ವಿಚಾರವಾಗಿ ಜಮೀರ್ ಆಪ್ತ ವಲಯದಲ್ಲಿ ಅಸಮಾಧಾನ ಸ್ಫೋಟಗೊಂಡಿರುವುದು ಸಿಎಂ ಕೆಂಗಣ್ಣಿಗೆ ಗುರಿಯಾಗಿದೆ.
ನಜೀರ್ ಅಹ್ಮದ್ ರಾಜೀನಾಮೆ ಬೆನ್ನಲ್ಲೇ ಜಮೀರ್ಗೆ ಸಂಕಷ್ಟ!
ಇತ್ತೀಚೆಗಷ್ಟೇ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರ ರಾಜೀನಾಮೆ ಪಡೆದಿದ್ದ ಮುಖ್ಯಮಂತ್ರಿಗಳು, ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ತಾವು ಮಣಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದರು. ಇದರ ಬೆನ್ನಲ್ಲೇ ಜಮೀರ್ ಅವರನ್ನೂ ತರಾಟೆಗೆ ತೆಗೆದುಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ದಾವಣಗೆರೆ ದಕ್ಷಿಣ: ಜಬ್ಬಾರ್ ಮತ್ತು ನಜೀರ್ ಪಾತ್ರವೇನು?
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಜಬ್ಬಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಜಮೀರ್ ಅಹ್ಮದ್ ಖಾನ್ ಒತ್ತಡ ಹೇರಿದ್ದರು. ಆದರೆ ಹೈಕಮಾಂಡ್ ಶಾಮನೂರು ಕುಟುಂಬದ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಮಣೆ ಹಾಕಿತು. ಇದರಿಂದ ಅಸಮಾಧಾನಗೊಂಡಿದ್ದ ಜಮೀರ್ ಮತ್ತು ಅವರ ಬೆಂಬಲಿಗರು ಪ್ರಚಾರದಿಂದ ದೂರ ಉಳಿದಿದ್ದಾರೆ ಎಂಬ ವರದಿ ಹೈಕಮಾಂಡ್ ತಲುಪಿದೆ. ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ನೀಡಿದ ವರದಿಯ ಆಧಾರದ ಮೇಲೆ ಸಿಎಂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ, 2026ರ ಈ ಉಪಚುನಾವಣೆ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಖಾನ್ ನಡುವಿನ ದಶಕಗಳ ಆಪ್ತ ಸಂಬಂಧಕ್ಕೆ ಸವಾಲಾಗಿ ಪರಿಣಮಿಸಿದ್ದು, ದಾವಣಗೆರೆ ರಾಜಕೀಯ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ.
Recent Articles